ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ (ಆರ್.ಆರ್. ನಗರ) ಇರುವ ಸ್ಯಾಂಡಲ್ವುಡ್ ನಟಿ ಕೃಷಿ ತಾಪಂಡ ಅವರ ಅಪಾರ್ಟ್ಮೆಂಟ್ನಲ್ಲಿ ಅವರ ಆಪ್ತ ಸ್ನೇಹಿತ ಹಾಗೂ ಉದ್ಯಮಿ ವೈಶಾಕ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟಿಯ ಮನೆಯಲ್ಲೇ ಈ ದುರಂತ ಸಂಭವಿಸಿರುವುದು ಸ್ಯಾಂಡಲ್ವುಡ್ ಅಂಗಳದಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕೃಷಿ ತಾಪಂಡ ಅವರ ಮನೆಯಲ್ಲಿಯೇ ಕೆಲ ದಿನಗಳಿಂದ ಉಳಿದುಕೊಂಡಿದ್ದ ವೈಶಾಕ್, ಈ ವಿಪರೀತ ನಿರ್ಧಾರ ಕೈಗೊಂಡಿರುವುದು ಇದೀಗ ಹಲವು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ.
ಲಭ್ಯವಾಗಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ರಾತ್ರಿ ಸುಮಾರು 8:30ರ ಹೊತ್ತಿಗೆ ಮನೆಯಲ್ಲಿ ಯಾರು ಇಲ್ಲದ ಸಮಯವನ್ನು ನೋಡಿಕೊಂಡು ವೈಶಾಕ್ ಈ ಕೃತ್ಯವೆಸಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಆತ ನಟಿ ಕೃಷಿ ತಾಪಂಡ ಅವರಿಗೆ ಕರೆ ಮಾಡಿ ತಾನು ಸಾಯುತ್ತಿರುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ತಕ್ಷಣ ಆಘಾತಕ್ಕೊಳಗಾದ ನಟಿ ಕುಟುಂಬಸ್ಥರಿಗೆ ಹಾಗೂ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ರಾಜರಾಜೇಶ್ವರಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಮೃತ ವೈಶಾಕ್ ಹಿನ್ನೆಲೆಯನ್ನು ಗಮನಿಸಿದರೆ, ಈತ ಈ ಹಿಂದೆ ಕ್ರಿಮಿನಲ್ ಪ್ರಕರಣವೊಂದರಲ್ಲಿಯೂ ಭಾಗಿಯಾಗಿದ್ದ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಯುವತಿಯೊಬ್ಬಳ ವಿಚಾರವಾಗಿ ರಾಜಿ ಮಾಡಿಕೊಳ್ಳುವಂತೆ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಎಂಬುವವರಿಗೆ ಬೆದರಿಕೆ ಪತ್ರ ಕಳುಹಿಸಿದ ಆರೋಪದ ಮೇಲೆ ಕೆಲವು ತಿಂಗಳ ಹಿಂದಷ್ಟೇ ಹೆಚ್.ಎ.ಎಲ್ (HAL) ಪೊಲೀಸರು ಈತನನ್ನು ಬಂಧಿಸಿದ್ದರು. ಹಿಂದಿನ ಈ ಘಟನೆಗಳ ಹತಾಶೆ, ವೈಯಕ್ತಿಕ ಸಮಸ್ಯೆಗಳು, ಅಥವಾ ಬೇರಾವುದೇ ಒತ್ತಡ ಈ ಆತ್ಮಹತ್ಯೆಗೆ ಕಾರಣವೇ ಎಂಬ ನಿಟ್ಟಿನಲ್ಲಿ ಪೊಲೀಸರು ಇದೀಗ ಎಲ್ಲಾ ಆಯಾಮಗಳಿಂದಲೂ ಸಮಗ್ರ ತನಿಖೆ ನಡೆಸುತ್ತಿದ್ದಾರೆ.









