ಬೆಂಗಳೂರು ಸಮೀಪದ ಬಿಡದಿಯ ಟೌನ್ಶಿಪ್ ಯೋಜನೆಗಾಗಿ ಮಂಡಲಹಳ್ಳಿಯಲ್ಲಿ ನಡೆದ ಭೂಸ್ವಾಧೀನ ಸರ್ವೆ ವೇಳೆ ರೈತ ಮಹಿಳೆಯರು ಮತ್ತು ಅಧಿಕಾರಿಗಳ ನಡುವೆ ಸಂಘರ್ಷ ನಡೆದಿದ್ದು, ಈ ಘಟನೆ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಉದ್ವಿಗ್ನ ಪರಿಸ್ಥಿತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನ ಮತ್ತು ಚಿತಾವಣೆಯೇ ಕಾರಣ ಎಂದು ಆರೋಪಿಸಿದ್ದಾರೆ.
ರೈತರ ಪರವಾಗಿ ಮಾತನಾಡಿದ ಕುಮಾರಸ್ವಾಮಿ, ತಮ್ಮ ತಲತಲಾಂತರದ ಭೂಮಿಯನ್ನು ಕಳೆದುಕೊಳ್ಳುವ ಭೀತಿಯಲ್ಲಿರುವ ರೈತರು ಕಳೆದ 500 ದಿನಗಳಿಂದ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ಹೇಳಿದರು. ಅವರ ಆಕ್ಷೇಪಣೆಗಳನ್ನು ಆಲಿಸದೆ ಅಧಿಕಾರಿಗಳು ಏಕಾಏಕಿ ಭೂಸ್ವಾಧೀನ ಸರ್ವೆಗೆ ಮುಂದಾಗಿರುವುದೇ ಪ್ರತಿಭಟನೆ ತೀವ್ರಗೊಳ್ಳಲು ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು.
ರೈತರ ಕೋಪ ಸಹಜವಾಗಿದ್ದು, ಸರ್ಕಾರ ಮೊದಲು ಅವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿತ್ತು. ಬಲವಂತದ ಕ್ರಮಗಳಿಂದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ ಎಂದು ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.









