ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC) ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನ್ಯಾಯದ ಬಗ್ಗೆ ಮಾತನಾಡುವ ಸರ್ಕಾರಕ್ಕೆ ಕರ್ನಾಟಕದಲ್ಲಿ KPSCಯಲ್ಲಿ ಕೇಳಿಬರುತ್ತಿರುವ ಆರೋಪಗಳು ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದರು.
ಸರ್ಕಾರಿ ಉದ್ಯೋಗ ಪಡೆಯಲು ಲಕ್ಷಾಂತರ ರೂಪಾಯಿ ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಉಲ್ಲೇಖಿಸಿದ ತೇಜಸ್ವಿ ಸೂರ್ಯ, ಹಗಲಿರುಳು ಓದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯ ಏನು ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಅರ್ಹತೆಗಿಂತ ಹಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ ಎಂಬ ಭಾವನೆ ಯುವಕರಲ್ಲಿ ಮೂಡಬಾರದು ಎಂದು ಅವರು ಹೇಳಿದರು.
KPSC ಅಧ್ಯಕ್ಷರನ್ನು ಅಮಾನತು ಮಾಡುವುದರಿಂದ ಮಾತ್ರ ಇಂತಹ ಗಂಭೀರ ಆರೋಪಗಳ ಕಳಂಕ ದೂರವಾಗುವುದಿಲ್ಲ ಎಂದು ತೇಜಸ್ವಿ ಸೂರ್ಯ ಅಭಿಪ್ರಾಯಪಟ್ಟರು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ವಿಶ್ವಾಸವನ್ನು ಸರ್ಕಾರ ಮರುಸ್ಥಾಪಿಸಬೇಕು ಎಂದು ಅವರು ಆಗ್ರಹಿಸಿದರು.









