ಬೆಂಗಳೂರು-ಚೆನ್ನೈ ಕೈಗಾರಿಕಾ ಕಾರಿಡಾರ್ (BCIC) ಯೋಜನೆಯು ಬೆಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡುವ ನಿರೀಕ್ಷೆಯಿದೆ. ನಗರ ಹಾಗೂ ಹೊರವಲಯಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ವೇಗ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳ ಭೂಮಿ ಮತ್ತು ಆಸ್ತಿ ಮೌಲ್ಯದಲ್ಲಿ ಏರಿಕೆ ಕಾಣುತ್ತಿದೆ. ಬಿಡದಿ ಟೌನ್ಶಿಪ್ ಯೋಜನೆಯೂ ನಗರದ ವಿಸ್ತರಣೆ ಮತ್ತು ಭೂಮಿ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಲಿದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರು-ಚೆನ್ನೈ ಕೈಗಾರಿಕಾ ಕಾರಿಡಾರ್ ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೂ ಆರ್ಥಿಕ ಲಾಭ ತಂದುಕೊಡುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಸುಮಾರು 560 ಕಿಲೋಮೀಟರ್ ವ್ಯಾಪ್ತಿಯಲ್ಲಿ ವಿಸ್ತರಿಸಲಿರುವ ಈ ಕಾರಿಡಾರ್ ಕೈಗಾರಿಕಾ ಅಭಿವೃದ್ಧಿಯ ಪ್ರಮುಖ ಕೇಂದ್ರಗಳನ್ನು ಸಂಪರ್ಕಿಸುವ ಮೂಲಕ ದಕ್ಷಿಣ ಭಾರತದ ಕೈಗಾರಿಕಾ ಬೆಳವಣಿಗೆಗೆ ಹೊಸ ವೇಗ ನೀಡುವ ಗುರಿಯನ್ನು ಹೊಂದಿದೆ.
ಸಾಮಾನ್ಯವಾಗಿ ಕೈಗಾರಿಕೆಗಳು ಬೆಳೆಯುತ್ತಿದ್ದಂತೆ ನಂತರ ಮೂಲಸೌಕರ್ಯ ಅಭಿವೃದ್ಧಿಯಾಗುತ್ತದೆ. ಆದರೆ BCIC ಯೋಜನೆಯಲ್ಲಿ ಆರಂಭದಿಂದಲೇ ಕೈಗಾರಿಕೆಗಳು, ಕಚೇರಿಗಳು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ. ಇದರಿಂದ ಹೂಡಿಕೆ ಹೆಚ್ಚಳ, ಉದ್ಯೋಗ ಸೃಷ್ಟಿ, ನಗರಾಭಿವೃದ್ಧಿ ಹಾಗೂ ಆರ್ಥಿಕ ಬೆಳವಣಿಗೆಗೆ ಹೊಸ ದಿಕ್ಕು ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.









