ಬೆಂಗಳೂರು ನಗರದಲ್ಲಿ ಇತ್ತೀಚೆಗೆ ನಡೆದ ಅನಾಥ ವಾಹನಗಳ ತೆರವು ಹಾಗೂ ನೋಟಿಸ್ ಜಾರಿ ಅಭಿಯಾನದ ಮುಂದುವರಿದ ಭಾಗವಾಗಿ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಅನಾಥ ವಾಹನಗಳನ್ನು ನಿಲ್ಲಿಸಲು ಹೆಚ್ಚುವರಿ ಸ್ಥಳ ಗುರುತಿಸುವಂತೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದೇ ವೇಳೆ ಕಾಮಗಾರಿಗಳ ಬಾಕಿ ಬಿಲ್ಗಳ ಕುರಿತು ಗುತ್ತಿಗೆದಾರರಿಗೆ ಅನುಕೂಲವಾಗುವ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಮತ್ತು ಎಂಜಿನಿಯರಿಂಗ್ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಅಭಿವೃದ್ಧಿ ಕಾಮಗಾರಿಗಳನ್ನು ನಿಯಮಾನುಸಾರ ಹಾಗೂ ಬಜೆಟ್ ಹಂಚಿಕೆಗೆ ಅನುಗುಣವಾಗಿ ಯೋಜಿಸಬೇಕು ಎಂದು ಸೂಚಿಸಿದರು. ಕಾಮಗಾರಿಗಳಿಗೆ ಸಕ್ಷಮ ಪ್ರಾಧಿಕಾರದಿಂದ ಆಡಳಿತಾತ್ಮಕ ಅನುಮೋದನೆ ದೊರೆತ ನಂತರವೇ ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು ಎಂದು ಎಲ್ಲಾ ವಿಭಾಗಗಳ ಎಂಜಿನಿಯರ್ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಅಭಿವೃದ್ಧಿ ಕಾಮಗಾರಿಗಳಲ್ಲಿ ನಿಯಮಾನುಸರಣೆ ಹಾಗೂ ಪಾರದರ್ಶಕತೆಗೆ ಆದ್ಯತೆ ನೀಡಬೇಕು ಎಂದು ಆಯುಕ್ತರು ತಿಳಿಸಿದರು. ಬಜೆಟ್ ಹಂಚಿಕೆ, ಆಡಳಿತಾತ್ಮಕ ಅನುಮೋದನೆ ಮತ್ತು ಟೆಂಡರ್ ಪ್ರಕ್ರಿಯೆಗಳನ್ನು ಸಮರ್ಪಕವಾಗಿ ಪೂರ್ಣಗೊಳಿಸಿದ ನಂತರವೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅನಾಥ ವಾಹನಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲೂ ಸ್ಥಳ ಗುರುತಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.









