ಬೆಂಗಳೂರು: ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಮಲೆನಾಡು ಶಿವಮೊಗ್ಗ ಮತ್ತು ರಾಜಧಾನಿ ಬೆಂಗಳೂರಿನ ನಡುವಿನ ವಿಮಾನ ಸೇವೆ ಮತ್ತೆ ಪುನರಾರಂಭಗೊಳ್ಳುವ ನಿರೀಕ್ಷೆ ಮೂಡಿದೆ. ಬೆಂಗಳೂರು-ಶಿವಮೊಗ್ಗ ಹಾಗೂ ಶಿವಮೊಗ್ಗ-ಬೆಂಗಳೂರು ಮಾರ್ಗದಲ್ಲಿ ವಿಮಾನಯಾನ ಆರಂಭಿಸಲು ಸ್ಟಾರ್ ಏರ್ ಸಂಸ್ಥೆ ಉತ್ಸುಕತೆ ತೋರಿದೆ. ಇದರೊಂದಿಗೆ ಶಿವಮೊಗ್ಗದಿಂದ ಚೆನ್ನೈ ಮತ್ತು ಹೈದರಾಬಾದ್ಗೆ ವಿಮಾನ ಸೇವೆ ಯಾವಾಗ ಆರಂಭವಾಗಲಿದೆ ಎಂಬ ಕುತೂಹಲವೂ ಪ್ರಯಾಣಿಕರಲ್ಲಿ ಹೆಚ್ಚಾಗಿದೆ.
ಸುಮಾರು ಮೂರು ತಿಂಗಳ ಹಿಂದೆ, ಅಂದರೆ ಮೇ 1ರಿಂದ ಶಿವಮೊಗ್ಗ-ಬೆಂಗಳೂರು ವಿಮಾನ ಸೇವೆ ಸ್ಥಗಿತಗೊಂಡಿತ್ತು. ಇದೇ ಮಾರ್ಗದಲ್ಲಿ ಇಂಡಿಗೋ ಸಂಸ್ಥೆ ವಿಮಾನ ಸೇವೆ ನಡೆಸುತ್ತಿತ್ತು. ಆದರೆ ವಿಮಾನಗಳು ಹಾಗೂ ಸಿಬ್ಬಂದಿ ಕೊರತೆಯ ಹಿನ್ನೆಲೆಯಲ್ಲಿ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದ ಬೆಂಗಳೂರು ಮತ್ತು ಶಿವಮೊಗ್ಗ ನಡುವೆ ವಿಮಾನದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದರು.
ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆ ಸ್ಥಗಿತಗೊಂಡಿದ್ದಕ್ಕೆ ಸಾರ್ವಜನಿಕರು ಹಾಗೂ ಪ್ರಯಾಣಿಕರು ಕಳವಳ ವ್ಯಕ್ತಪಡಿಸಿದ್ದರು. ವಿಮಾನ ಸೇವೆಯನ್ನು ಶೀಘ್ರವಾಗಿ ಪುನರಾರಂಭಿಸುವಂತೆ ಒತ್ತಾಯವೂ ಕೇಳಿಬಂದಿತ್ತು. ಇದೀಗ ಸ್ಟಾರ್ ಏರ್ ಸಂಸ್ಥೆ ಬೆಂಗಳೂರು-ಶಿವಮೊಗ್ಗ ಮಾರ್ಗದಲ್ಲಿ ಸೇವೆ ಆರಂಭಿಸಲು ಆಸಕ್ತಿ ತೋರಿರುವುದು ಪ್ರಯಾಣಿಕರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.









