ಬೆಂಗಳೂರಿನಲ್ಲಿ ಟಿವಿ ಹಾಗೂ ಇತರ ಕೇಬಲ್ಗಳ ಅವ್ಯವಸ್ಥೆಯಿಂದ ಈ ಹಿಂದೆಯೂ ಹಲವು ಸಮಸ್ಯೆಗಳು ಉಂಟಾಗಿದ್ದು, ಕೆಲ ಸಂದರ್ಭಗಳಲ್ಲಿ ಜೀವಹಾನಿಯೂ ಸಂಭವಿಸಿದೆ. ನಗರದ ನಾಗರಿಕರಿಗೆ ಕೇಬಲ್ಗಳಿಂದ ಎದುರಾಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಹಾಗೂ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಟೀಕಿಸಿದ್ದಾರೆ.
ಬೆಂಗಳೂರು ನಗರದ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ ಮೂಲಸೌಕರ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಕಿರಣ್ ಮಜುಂದಾರ್ ಶಾ ಆಗಾಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಧ್ವನಿ ಎತ್ತುತ್ತಿರುತ್ತಾರೆ. ಈ ಹಿಂದೆಯೂ ನಗರದ ರಸ್ತೆ ನಿರ್ಮಾಣ ಮತ್ತು ಮೂಲಸೌಕರ್ಯಗಳ ವಿಚಾರವಾಗಿ ಸರ್ಕಾರವನ್ನು ಟೀಕಿಸಿ ಅವರು ಮಾಡಿದ್ದ ಪೋಸ್ಟ್ಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದವು.
ಈ ಬಾರಿ ಕೇಬಲ್ಗಳ ಅವ್ಯವಸ್ಥೆಯನ್ನು ಎತ್ತಿ ತೋರಿಸುವ ರೀತಿಯಲ್ಲಿ ‘ಸ್ಪೈಡರ್ಮ್ಯಾನ್’ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ರಸ್ತೆಗಳು ಹಾಗೂ ಕಟ್ಟಡಗಳ ನಡುವೆ ಹರಡಿಕೊಂಡಿರುವ ಕೇಬಲ್ಗಳ ಚಿತ್ರಣವನ್ನು ಪ್ರತಿಬಿಂಬಿಸುವಂತಿರುವ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಗರದ ಮೂಲಸೌಕರ್ಯ ಸಮಸ್ಯೆಗಳ ಕುರಿತು ಮತ್ತೆ ಚರ್ಚೆ ಹುಟ್ಟುಹಾಕಿರುವ ಈ ಪೋಸ್ಟ್ಗೆ ನೆಟ್ಟಿಗರಿಂದ ವಿವಿಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.








