ಬೆಂಗಳೂರು ಹೊಸೂರು ರಸ್ತೆಯ ಕೂಡ್ಲು ಗೇಟ್ ಸಮೀಪದಲ್ಲಿರುವ 18 ಮಹಡಿಗಳ ಎಸ್ಎನ್ಎನ್ ರಾಜ್ ಎಟರ್ನಿಯಾ ಅಪಾರ್ಟ್ಮೆಂಟ್ ಒಂದು ಬದಿಗೆ ವಾಲಿರುವುದು ಬೆಳಕಿಗೆ ಬಂದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಕಟ್ಟಡವನ್ನು ನೆಲಸಮ ಮಾಡಲು ಬಿಲ್ಡರ್ ನಿರ್ಧರಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ವಾಸಯೋಗ್ಯ ಪ್ರಮಾಣಪತ್ರ (Occupancy Certificate) ಪಡೆದ ಕೇವಲ ಮೂರು ತಿಂಗಳಲ್ಲೇ ಕಟ್ಟಡ ವಾಲಿರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ. ತಮ್ಮ ಕನಸಿನ ಮನೆಗಳಿಗೆ ಗೃಹಪ್ರವೇಶ ಮಾಡುವ ಮುನ್ನವೇ ಈ ಬೆಳವಣಿಗೆ ನಡೆದಿರುವುದರಿಂದ ಮನೆ ಖರೀದಿದಾರರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಸುಮಾರು ನಾಲ್ಕು ವರ್ಷಗಳ ಕಾಲ ನಿರ್ಮಾಣಗೊಂಡ ಈ ಬೃಹತ್ ಅಪಾರ್ಟ್ಮೆಂಟ್ ಈಗ ಸುರಕ್ಷತೆಯ ದೃಷ್ಟಿಯಿಂದ ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಕಟ್ಟಡ ಏಕೆ ವಾಲಿತು ಎಂಬ ಕುರಿತು ತಾಂತ್ರಿಕ ಪರಿಶೀಲನೆ ನಡೆಯುತ್ತಿದ್ದು, ಸಂಬಂಧಿತ ಅಧಿಕಾರಿಗಳು ಹಾಗೂ ತಜ್ಞರು ಘಟನೆಗೆ ಕಾರಣಗಳ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.









