ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣದ ಕಾರ್ಯಾರಂಭಕ್ಕೆ ಇದ್ದ ಪ್ರಮುಖ ಅಡೆತಡೆಗಳು ನಿವಾರಣೆಯಾಗಿದ್ದು, ಮುಂದಿನ ಮೂರು ತಿಂಗಳಲ್ಲಿ ವಿಮಾನ ನಿಲ್ದಾಣವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವ ಸಾಧ್ಯತೆ ಇದೆ. ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಪರಿಸರ ಪ್ರಕರಣದ ಅಂತಿಮ ತೀರ್ಪನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಕಟಿಸಿದ್ದು, ಯೋಜನೆಗೆ ಮಹತ್ವದ ಹಸಿರು ನಿಶಾನೆ ದೊರೆತಂತಾಗಿದೆ.
ಇದೀಗ ಬಾಕಿ ಉಳಿದಿರುವ ವಿಮಾನ ಹಾರಾಟ ಪರೀಕ್ಷೆಯನ್ನು ಶೀಘ್ರದಲ್ಲೇ ನಡೆಸಲಾಗುತ್ತದೆ. ಬಳಿಕ ಅಗತ್ಯ ಅನುಮತಿಗಳು ಹಾಗೂ ಉಳಿದ ಪ್ರಕ್ರಿಯೆಗಳು ಪೂರ್ಣಗೊಂಡರೆ, ವಿಜಯಪುರ ವಿಮಾನ ನಿಲ್ದಾಣದ ಉದ್ಘಾಟನೆ ಮುಂದಿನ ಮೂರು ತಿಂಗಳಲ್ಲಿ ನಡೆಯಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಈ ವಿಮಾನ ನಿಲ್ದಾಣ ಕಾರ್ಯಾರಂಭವಾದರೆ ವಿಜಯಪುರ ಮಾತ್ರವಲ್ಲದೆ ಕಿತ್ತೂರು ಕರ್ನಾಟಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೂ ಉತ್ತಮ ವಾಯು ಸಂಪರ್ಕ ದೊರೆಯಲಿದೆ. ಇದರಿಂದ ಕೈಗಾರಿಕೆ, ಪ್ರವಾಸೋದ್ಯಮ, ವ್ಯಾಪಾರ ಮತ್ತು ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೆ ಹೊಸ ಉತ್ತೇಜನ ಸಿಗುವ ನಿರೀಕ್ಷೆಯಿದೆ.









