ರಾಜ್ಯದ ಬರಪೀಡಿತ ತಾಲೂಕುಗಳ ರೈತರ ನೆರವಿಗೆ ಬ್ಯಾಂಕರ್ಗಳ ರಾಜ್ಯ ಮಟ್ಟದ ಸಮಿತಿ (ಎಸ್ಎಲ್ಬಿಸಿ) ಮುಂದಾಗಿದೆ. ಕೃಷಿ ಹಾಗೂ ಕೃಷಿ ಸಂಬಂಧಿತ ಸಾಲಗಳ ಮರುಪಾವತಿಗೆ ವಿಶೇಷ ಪರಿಹಾರ ಯೋಜನೆಯನ್ನು ಪ್ರಕಟಿಸಲಾಗಿದ್ದು, ರೈತರಿಗೆ ಆರ್ಥಿಕ ಹೊರೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಯೋಜನೆಯಡಿ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ಮೊರಟೋರಿಯಂ ಅವಧಿ ನೀಡಲು ನಿರ್ಧರಿಸಲಾಗಿದೆ. ಇದರ ಜೊತೆಗೆ, ಒಟ್ಟು ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸುವ ಮೂಲಕ ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಹೆಚ್ಚಿನ ಸಮಯಾವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸಭೆಯ ಟಿಪ್ಪಣಿಯ ಆಧಾರದ ಮೇಲೆ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಬರಪೀಡಿತ ಪ್ರದೇಶಗಳ ರೈತರಿಗೆ ಸಾಲ ಮರುಪಾವತಿಯಲ್ಲಿ ತಾತ್ಕಾಲಿಕ ಪರಿಹಾರ ನೀಡುವ ಉದ್ದೇಶದಿಂದ ಈ ಕ್ರಮ ಜಾರಿಗೆ ತರಲಾಗುತ್ತಿದೆ.








